ಶಿವಮೊಗ್ಗ :- ಕರ್ನಾಟಕದ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಹಾಗೂ ಈವರೆಗೆ ದೇಶದ ವಿವಿಧೆಡೆಗಳ ಮಹಾನ್ ವ್ಯಕ್ತಿಗಳ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ 5 ಮತ್ತು 10 ರೂ. ನಾಣ್ಯಗಳನ್ನು ಚಲಾವಣೆಗೆ ಬಿಡುಗಡೆ ಮಾಡುವಂತೆ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಹಾಗೂ ಟ್ರಸ್ಟ್ ಆಗ್ರಹಿಸಿದೆ.
ಕರ್ನಾಟಕದ ಮಹಾನ್ ವ್ಯಕ್ತಿಗಳಾದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ, ವೀರರಾಣಿ ಕಿತ್ತೂರು ಚನ್ನಮ್ಮ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ, ಭಕ್ತ ಕನಕದಾಸ ಹಾಗೂ ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡುವಂತೆ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ನ ಅಧ್ಯಕ್ಷ ದೇವದಾಸ್ ನಾಯಕ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ಈ ಹಿಂದೆ ಯಾವುದೇ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ 5 ಮತ್ತು 10 ರೂ. ನಾಣ್ಯಗಳನ್ನು ಚಲಾವಣೆಗೆ ಬಿಡಲಾಗುತ್ತಿತ್ತು. ಆದರೆ, ಈಗ ಈ ನಿಯಮ ಕೈಬಿಟ್ಟಿರುವುದರಿಂದ ಇಂತಹ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಸಂಗ್ರಹಿಸುವುದು ದುಬಾರಿಯಾಗಿ ಪರಿಣಮಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಮಹಾನ್ ವ್ಯಕ್ತಿಗಳು ಸೇರಿದಂತೆ ಇತರೆ ವಿಶೇಷ ನಾಣ್ಯಗಳ ಜೊತೆಗೆ ಚಲಾವಣೆ ನಾಣ್ಯಗಳನ್ನು ಬಿಡುಗಡೆ ಮಾಡುವ ಮೂಲಕ ನಾಣ್ಯ ಸಂಗ್ರಾಹಕರಿಗೆ ಅನುಕೂಲ ಮಾಡಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಪ್ರಪಂಚದ ಬಹುತೇಕ ದೇಶಗಳಲ್ಲಿ ನೋಟುಗಳ ಮೇಲೆ ಅಲ್ಲಿನ ಪ್ರಮುಖ ವ್ಯಕ್ತಿಗಳ ಚಿತ್ರಗಳನ್ನು ಮುದ್ರಿಸಲಾಗುತ್ತಿದೆ. ಆದರೆ, ಭಾರತದಲ್ಲಿ ಮಹಾತ್ಮ ಗಾಂಧಿ ಹೊರತುಪಡಿಸಿದರೆ ಇತರೆ ಮಹಾನ್ ವ್ಯಕ್ತಿಗಳ ಭಾವಚಿತ್ರಗಳ ನೋಟುಗಳು ಮುದ್ರಿತಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟುಗಳ ಮೇಲೆ ಸ್ವಾಮಿ ವಿವೇಕಾನಂದ, ಜಗಜ್ಯೋತಿ ಬಸವೇಶ್ವರ, ಸರ್ ಎಂ. ವಿಶ್ವೇಶ್ವರಯ್ಯ, ಬಾಲಗಂಗಾಧರ ತಿಲಕ್, ಭಗತ್ ಸಿಂಗ್, ಲಾಲಾ ಲಜಪತರಾಯ್, ಛತ್ರಪತಿ ಶಿವಾಜಿ, ಡಾ.ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಭಾವಚಿತ್ರ ಮುದ್ರಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಚಂದ್ರಕಾಂತ್ ಆಗ್ರಹಿಸಿದರು.
ನಾಣ್ಯಗಳ ಮುದ್ರಣದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದ್ದು, ಕರ್ನಾಟಕದ ಬಸವೇಶ್ವರ, ಕವಿ ಮುದ್ದಣ್ಣ, ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರದ ನಾಣ್ಯಗಳನ್ನು ಮಾತ್ರವೇ ಬಿಡುಗಡೆ ಮಾಡಿದ್ದು, ಬೇರೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನ್ ವ್ಯಕ್ತಿಗಳ ನಾಣ್ಯಗಳ ಬಿಡುಗಡೆ ಬೆರೆಳೆಣಿಕೆಷ್ಟೂ ಇಲ್ಲ ಎಂದ ಅವರು, ಕೂಡಲೇ ಮೇಲ್ಕಂಡ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಬಿಡುಗಡೆ ಮಾಡುವ ಮೂಲಕ ಕರ್ನಾಟಕಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಸಂಘದ ನಿರ್ದೇಶಕ ಎಲ್. ಸುಬ್ರಹ್ಮಣ್ಯ ಮಾತನಾಡಿ, ಜನವರಿ ೧೬, ೧೭ ಮತ್ತು ೧೮ರಂದು ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಪ್ರಾಚೀನ ನಾಣ್ಯ ಮತ್ತು ಅಂಚೆ ಚೀಟಿ ಪ್ರದರ್ಶನವನ್ನು ಏರ್ಪಡಿಸಲಾಗುವುದು. ಈ ಸಂದರ್ಭದಲ್ಲಿ ಕರ್ನಾಟಕದ ರಾಜ ಮನೆತನಗಳಾದ ಕದಂಬರು, ಹೊಯ್ಸಳರು, ಚಾಲುಕ್ಯರು, ರಾಷ್ಟ್ರಕೂಟರು ಸೇರಿದಂತೆ ರಾಜರ ನಾಣ್ಯಗಳನ್ನು ಕೂಡ ಪ್ರದರ್ಶಿಸಲಾಗುವುದು. ಇದೊಂದು ಅಪೂರ್ವ ಪ್ರದರ್ಶನವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ವಿನೋದ್ ಕುಮಾರ್ ಜೈನ್, ಟ್ರಸ್ಟಿ ಮಹೇಂದ್ರಕುಮಾರ್ ಜೈನ್, ನಿರ್ದೇಶಕರಾದ ನಾಗರಾಜ್, ರಾಘವೇಂದ್ರ ಉಪಸ್ಥಿತರಿದ್ದರು.