ಶಿವಮೊಗ್ಗ: ಜಿಲ್ಲೆಯಲ್ಲಿ ಅಗತ್ಯ ಮೂಲಸೌಕರ್ಯಗಳಿದ್ದು, ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೆಸಿಟಿಯು ಬೆಂಗಳೂರು ಹಾಗೂ ಮಾಚೇನಹಳ್ಳಿ ಕೈಗಾರಿಕಾ ಸಂಘದ ಸಹಯೋಗದಲ್ಲಿ ಮಾಚೇನಹಳ್ಳಿ ಶಾಂತಲಾಸ್ ಸ್ಪರೋಕಾಸ್ಟ್ ಲರ್ನಿಂಗ್ ಸೆಂಟರ್ನಲ್ಲಿ ಏರ್ಪಡಿಸಿದ್ದ ಎಂಎಸ್ಎಂಇಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆ ಅಡಿಯಲ್ಲಿ ರಫ್ತು ಉತ್ತೇಜನ ಮತ್ತು ಸುಗಮಗೊಳಿಸುವಿಕೆಗಾಗಿ ಒಂದು ದಿನದ ಜಾಗೃತಿ ಮೂಡಿಸುವ ಕಾರ್ಯಗಾರದಲ್ಲಿ ಮಾತನಾಡಿದರು.
ಉದ್ಯಮಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಸರ್ಕಾರಗಳು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ರಾಜ್ಯದ ಹಲವು ಕುಶಲಕರ್ಮಿಗಳು ತಯಾರಿಸಿರುವ ಉತ್ಪನ್ನಗಳನ್ನು ಕ್ರಾಫ್ಟ್ ಆಫ್ ಮಲ್ನಾಡ್ ಎಂಬ ಗುರುತಿನಲ್ಲಿ ಪ್ರಚಾರ ಕೈಗೊಂಡರು. ರಫ್ತು ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಉದ್ಯಮದ ಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಗಳ ಸದುಪಯೋಗಪಡಿಸಿಕೊಂಡು ರಫ್ತು ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ರಾಜೇಶ್ ಎಸ್ ಟಿ, ದಿನೇಶ್ ಎಚ್.ಎಲ್., ಜಿಲ್ಲಾ ಕೈಗಾರಿಕಾ ಕೇಂದ್ರದ ರವೀಂದ್ರನಾಥ್ ಹಾಗೂ ಅಧಿಕಾರಿಗಳು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಸುರೇಶ್ ಮತ್ತು ಪದಾಧಿಕಾರಿಗಳು, ವಿಟಿಪಿಸಿ ಬೆಂಗಳೂರಿನ ಅರವಿಂದ್ ಭಟ್ ಮತ್ತು ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.