
ಶಿವಮೊಗ್ಗ :- ರೈತರ ಜಮೀನುಗಳ ದಾಖಲೆಗಳನ್ನು ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಇಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ ಡಿಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಜಿಲ್ಲೆಯಲ್ಲಿ ಶರಾವತಿ ಮುಳುಗಡೆಯಿಂದ ಸ್ಥಳಾಂತರಗೊಂಡ ಸಂತ್ರಸ್ಥ ರೈತರಿಗೆ ಬೇರೆ ಕಡೆ ಜಮೀನು ಮಂಜೂರು ಮಾಡಿದ್ದು, ಕಂದಾಯ ಭೂಮಿ, ಗೋಮಾಳ, ಹುಲ್ಲುಬನ್ನಿ, ಕರಾಬು ಜಮೀನುಗಳಲ್ಲಿ ಇತರೆಯವರಿಗೆ ಜಮೀನು ಮಂಜೂರು ಮಾಡಿದ್ದು, ಅಲ್ಲಿ ಸುಮಾರು ೬೦ ವರ್ಷಗಳಿಂದಲೂ ಹೆಚ್ಚು ಸರ್ಕಾರದಿಂದ ಹಕ್ಕು ಪತ್ರ ಪಡೆದು ಖಾತೆ, ಪಹಣಿ, ದಾಖಲಾಗಿ ಪೋಡು ಮಾಡಿಸಿಕೊಂಡು ನೆಮ್ಮದಿಯಿಂದ ತೋಟಗಳನ್ನು ಮತ್ತು ಇತರೆ ಬೆಳೆಗಳನ್ನು ಬೆಳೆದು ಅಲ್ಲಿಯೇ ಮನೆ ಕಟ್ಟಿಕೊಂಡು ಬ್ಯಾಂಕ್ ವಗೈರೆಗಳಲ್ಲಿ ಸಾಲಪಡೆದು ವ್ಯವಸಾಯ ವೃತ್ತಿ ಮಾಡುತ್ತಿದ್ದಾರೆ. ಕೆಲವು ರೈತರು 30-40 ವರ್ಷಗಳಿಂದ ಬಗರ್ಹುಕುಂ ಸಾಗುವಳಿ ಮಾಡುತ್ತಿದ್ದು, ಅವರಿಗೆ ಹಕ್ಕು ಪತ್ರ ಕೊಟ್ಟಿರುವುದಿಲ್ಲ.
ಶರಾವತಿ ಮುಳುಗಡೆ ರೈತರು ಮತ್ತು ಇತರೆ ರೈತರ ಜಮೀನುಗಳನ್ನು ಅರಣ್ಯ ಇಲಾಖೆಯವರ ಹೆಸರಿಗೆ ಇಂಡೀಕರಣ ಮಾಡಿಕೊಂಡಿದ್ದಾರೆ. ಸರ್ಕಾರವೇ ಮಂಜೂರು ಮಾಡಿದ ಜಮೀನುಗಳನ್ನು ಅರಣ್ಯ ಇಲಾಖೆಗೆ ಸೇರಿದ್ದು, ಈ ಜಮೀನುಗಳ ದಾಖಲೆಗಳನ್ನು ವಜ ಮಾಡಬೇಕು ಎಂದು ಅರಣ್ಯ ಇಲಾಖೆ ಉಪವಿಭಾಗಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಉಪವಿಭಾಗಾಧಿಕಾರಿಗಳು ರೈತರಿಗೆ ನೋಟೀಸ್ ಕೊಡುತ್ತಿದ್ದಾರೆ. ಇದರಿಂದ ಲಕ್ಷಾಂತರ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಮತ್ತು ಅನಾವಶ್ಯಕವಾಗಿ ಕೋರ್ಟ್ಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ.
ಸಂವಿಧಾನದ ಪ್ರಕಾರ ದೇಶದ ಪ್ರತಿಯೊಬ್ಬ ರೈತನಿಗೂ ಜೀವನ ಮಾಡಲು ಸರ್ಕಾರಗಳು ಉದ್ಯೋಗ ದೊರಕಿಸಿ ಕೊಡಬೇಕಾಗಿದೆ. ಸರ್ಕಾರಗಳು ವಿಫಲವಾದಾಗ ರೈತರೇ ಸ್ವಯಂ ಉದ್ಯೋಗ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇವರೆಲ್ಲರು ಸಣ್ಣ ಅತಿ ಸಣ್ಣ ರೈತರಾಗಿದ್ದು, ಈಗ ಸರ್ಕಾರದ ನೋಟೀಸ್ನ್ನು ನೋಡಿ ಸಾಮೂಹಿಕ ಆತ್ಮಹತ್ಯೆಗೂ ಚಿಂತನೆ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ನೋಟೀಸ್ ಕೊಡುವುದನ್ನು ನಿಲ್ಲಿಸಬೇಕು. ಯಾವುದೇ ಕಾರಣಕ್ಕೂ ನೋಟೀಸ್ ಕೊಟ್ಟಿರುವ ರೈತರ ದಾಖಲೆಗಳನ್ನು ವಜ ಮಾಡಬಾರದು. ಮತ್ತು ಬಗರ್ಹುಕುಂ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ತಕ್ಷಣವೇ ಹಕ್ಕು ಪತ್ರ ಕೊಡಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಶಾಸಕರಾದ ಶಾರದ ಪೂರ್ಯಾನಾಯ್ಕ್, ರೈತ ಪ್ರಮುಖರಾದ ಹಿಟ್ಟೂರು ರಾಜು, ಟಿ.ಎಂ. ಚಂದ್ರಪ್ಪ, ಕೆ.ರಾಘವೇಂದ್ರ, ಇ.ಬಿ. ಜಗದೀಶ್, ಮುಖಂಡರಾದ ಹನುಮಂತ್, ಮಂಜುನಾಥ್, ಕೆ.ಎಲ್. ಅಶೋಕ್, ನಾರಾಯಣ್, ಹನುಮಮ್ಮ ಮತ್ತಿತರರಿದ್ದರು.