google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಈ ನೆಲದ ಭವ್ಯ ಪರಂಪರೆ ಮತ್ತು ಶ್ರೀಮಂತ ಸಂಸ್ಕೃತಿಯ ಪ್ರತೀಕವಾಗಿರುವ, ಕನ್ನಡಿಗರ ಅಸ್ಮಿತತೆಯ ಪ್ರತಿಬಿಂಬವಾಗಿರುವ ಕನ್ನಡ ರಾಜ್ಯೋತ್ಸವವನ್ನು ನವೆಂಬರ್‌01ರಂದು ನಾಡಿನ ಎಲ್ಲರೂ ಪಾಲ್ಗೊಂಡು ಸಂಭ್ರಮ-ಸಡಗರಗಳಿಂದ ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನ್ನಡ ಕೇವಲ ಒಂದು ಭಾಷೆಯಾಗಿರದೆ, ಅದು ಕನ್ನಡದ ಜನರು, ಅವರ ಸಂಸ್ಕೃತಿ, ಸಾಹಿತ್ಯ, ಕಲೆ, ಸಂಗೀತ, ನೃತ್ಯ, ಭೂಮಿ ಮತ್ತು ನದಿಗಳ ಸಮಗ್ರತೆಯನ್ನು ಪ್ರತಿನಿಧಿಸುವಂತದ್ದಾಗಿದೆ ಎಂದರು.

ರಾಜ್ಯೋತ್ಸವವನ್ನು ನವೆಂಬರ್‌01ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಚರಿಸಲು ಹಾಗೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದ ಅವರು, ಅಂದು ಬೆಳಿಗ್ಗೆ 8ಗಂಟೆಗೆ ನಗರದ ಸೈನ್ಸ್‌ಮೈದಾನದಿಂದ ಕಲಾತಂಡಗಳೊಂದಿಗೆ ಹೊರಡುವ ಭುವನೇಶ್ವರಿಯ ಭವ್ಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ನೆಹರೂ ಕ್ರೀಡಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದರು.

ರಾಜ್ಯೋತ್ಸವ ದಿನದಂದು ನಗರದ ಪ್ರಮುಖ ರಸ್ತೆ, ವರ್ತುಲಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿ-ಕಟ್ಟಡಗಳಿಗೆ ವಿದ್ಯುತ್‌ಅಲಂಕಾರಗೊಳಿಸಿ, ತಳಿರು-ತೋರಣಗಳಿಂದ ಶೃಂಗರಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ ಅವರು, ನಗರದ ಪ್ರಮುಖ ಬೀದಿಗಳಲ್ಲಿರುವ ಅಂಗಡಿಗಳಿಗೆ ಅಳವಡಿಸಿರುವ ನಾಮಫಲಕ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಕನ್ನಡದಲ್ಲಿರುವಂತೆ ಸಾರ್ವಜನಿಕರು ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಸ್ಥಳೀಯ ಸಂಸ್ಥೆಯಿಂದ ನೀಡಲಾಗಿರುವ ವಾಣಿಜ್ಯ ಪರವಾನಿಗೆಯನ್ನು ನಿರ್ದಾಕ್ಷಿಣ್ಯವಾಗಿ ವಜಾಗೊಳಿಸಲಾಗುವುದು ಎಂದರು.

ನಿಯಮಾನುಸಾರ ಅಂದು ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ, ಧ್ವಜವಂದನೆ ಸ್ವೀಕಾರ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯೋತ್ಸವ ಸಂದೇಶ, ಕವಾಯತು, ನಂತರ ಸ್ಥಳೀಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ ವಿವಿಧ ಇಲಾಖೆಗಳ ಯೋಜನೆಗಳನ್ನು ಪ್ರಚುರಪಡಿಸುವ ಸ್ಥಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು. ಆಕರ್ಷಕ ಸ್ಥಬ್ಧಚಿತ್ರಗಳಿಗೆ, ಪಥಸಂಚಲನದಲ್ಲಿ ಭಾಗವಹಿಸಿ ವಿಶೇಷ ತಂಡಗಳಿಗೆ ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು.

 ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಎಲ್ಲಾ ಮಕ್ಕಳನ್ನು ಅಂದು ಸಕಾಲದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು. ಮಕ್ಕಳನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಬರಲು ವಾಹನ ವ್ಯವಸ್ಥೆ ಹಾಗೂ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ಅಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ., ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕನ್ನಡಪರ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *